ಮಂಗಳೂರು : ಅಂತರ್ ರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ವಿಲೇವಾರಿ ಮಾಡಲಾಯಿತು.
ಠಾಣೆಯಲ್ಲಿ ಬಾಕಿ ಇರುವ ಮಾದಕ ವಸ್ತುಗಳನ್ನು ವಿಲೇವಾರಿಗೊಳಿಸುವ ಸಂಬಂಧ ನ್ಯಾಯಾಲಯಗಳಿಂದ ಆದೇಶವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಮಾದಕ ದ್ರವ್ಯ ವಿಲೇವಾರಿ ಸಮಿತಿಯ ಅಧ್ಯಕ್ಷ ಸೋನವಣೆ ಋಷಿಕೇಶ್ ಭಗವಾನ್, ಐಪಿಎಸ್ ಮತ್ತು ಸದಸ್ಯರಾದ ಶಿವಾಂಶು ರಜಪೂತ್, ಐಪಿಎಸ್ ಸಹಾಯಕ ಪೊಲೀಸ್ ಅಧೀಕ್ಷಕರು ಬಂಟ್ವಾಳ ಉಪವಿಭಾಗ ಮತ್ತು ಡಾ. ಗಾನ ಪಿ ಕುಮಾರ್, ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪ ವಿಭಾಗ ರವರ ಸಮಕ್ಷಮದಲ್ಲಿ ವಿಲೇವಾರಿ ಮಾಡಲಾಯಿತು.
ವಿವಿಧ ಠಾಣೆಯ 11 ಪ್ರಕರಣಗಳಲ್ಲಿ ಸುಮಾರು ರೂ 23,75,300/- ಮೌಲ್ಯದ 53 ಕೆ.ಜಿ 128 ಗ್ರಾಂ ಮಾದಕ ವಸ್ತು ಗಾಂಜಾವನ್ನು ಮತ್ತು ಸುಮಾರು ರೂ 30,00,000/- ಮೌಲ್ಯದ 120 ಗ್ರಾಂ ಹೆರಾಯಿನ್ ನ್ನು ಬಯೋಮೆಡಿಕಲ್ ತ್ಯಾಜ್ಯ ನಿರ್ವಹಣೆ, ಸಂಸ್ಕರಣೆ ಮತ್ತು ವಿಲೇವಾರಿ ಘಟಕವಾದ ಮೆ|| ರಾಮ್ಕಿ ಎನರ್ಜಿ ಮತ್ತು ಎನ್ವಿರೋನ್ಮೆಂಟ್ ಲಿ. ರವರಿಗೆ ಹಸ್ತಾಂತರಿಸಿ ನಾಶಪಡಿಸಲಾಯಿತು.