ಭಟ್ಕಳ: ಕನ್ನಡ ಭಾಷೆ, ನೆಲ, ಜಲಕ್ಕಾಗಿ ಕನ್ನಡಿಗರು ಒಗ್ಗಟ್ಟಾಗಿ ಉಳಿಯದೇ ಇದ್ದರೆ ಕನ್ನಡಿಗರಿಗೆ ಉಳಿಗಾಲವಿಲ್ಲ ಎಂದು ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ.
ಅವರು ತಾಲೂಕಿನ ಆಸರಕೇರಿ ಶ್ರೀ ಭುವನೇಶ್ವರಿ ಕನ್ನಡ ಸಂಘದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಗಡಿಭಾಗದಲ್ಲಿ ಭಾಷೆ, ನೆಲ ಕುರಿತ ಸಮಸ್ಯೆಗಳು ಮುಗಿಯುತ್ತಿಲ್ಲ. ನಾವು ನಿರ್ಲಕ್ಷ್ಯ ವಹಿಸಿದರೆ ಮುಂದೊಂದು ದಿನ ನಮ್ಮ ಕಾರವಾರವನ್ನೂ ಕಳೆದುಕೊಳ್ಳಬೇಕಾಗಬಹುದು. ಆದ್ದರಿಂದ ನಾವೆಲ್ಲರೂ ಎಚ್ಚರಿಕೆಯಿಂದ ನಿರಂತರವಾಗಿ ಹೋರಾಟದಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಭಟ್ಕಳದಲ್ಲಿ ಕನ್ನಡಪರ ಕಾರ್ಯಕ್ರಮ, ಹೋರಾಟಗಳಲ್ಲಿ ಕಳೆದ 25 ವರ್ಷಗಳಿಂದ ಆಸರಕೇರಿ ಶ್ರೀ ಭುವನೇಶ್ವರಿ ಕನ್ನಡ ಸಂಘವು ಹೋರಾಟ ನಡೆಸಿಕೊಂಡು ಬಂದಿರುವುದು ಸ್ತುತ್ಯಾರ್ಹವಾಗಿದೆ ಎಂದರು. ಮಾಜಿ ಶಾಸಕ ಜೆ.ಡಿ. ನಾಯ್ಕ ಮಾತನಾಡಿದರು. ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ರಮೇಶ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಭಟ್ಕಳ ಸಹಾಯಕ ಆಯುಕ್ತ ಮಮತಾದೇವಿ, ನಿಚ್ಚಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣ ನಾಯ್ಕ, ಭಟ್ಕಳ ಅರ್ಬನ್ ಬ್ಯಾಂಕ್ ನಿರ್ದೇಶಕ ಶ್ರೀಧರ ನಾಯ್ಕ, ಭಟ್ಕಳ ಕಸಾಪ ಅಧ್ಯಕ್ಷ ಗಂಗಾಧರ ನಾಯ್ಕ, ಸೋನಾರಕೇರಿ ಶಾಸಕರ ಮಾದರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟೇಶ ನಾಯ್ಕ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ಅಧ್ಯಕ್ಷ ಮನಮೋಹನ ನಾಯ್ಕ, ಪುರಸಭಾ ನಾಮ ನಿರ್ದೇಶನ ಸದಸ್ಯ ಶ್ರೀಕಾಂತ ನಾಯ್ಕ, ಮಹೇಶ ನಾಯ್ಕ, ವಸಂತ ನಾಯ್ಕ, ಶಿವಾನಂದ ಮಹಾಲೆ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯುವ ಸಾಹಿತಿ ಮಂಜುನಾಥ ನಾಯ್ಕ ಮುರುಡೇಶ್ವರ ಇವರ ಕವನ ಸಂಕಲನ ಹಾಗೂ ಪ್ರಬಂಧ ಸಂಕಲನ ಲೀಲಾವೃತ ಕೃತಿಗಳನ್ನು ಬಿಡುಗಡೆಗೊಳಿಸಲಾಯಿತು. ಕವಿ ಶ್ರೀಧರ ಶೇಟ್ ಕೃತಿಗಳನ್ನು ಪರಿಚಯಿಸಿದರು. ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಶ್ರೀ ಭುವನೇಶ್ವರಿ ಕನ್ನಡ ಸಂಘದ ಕಾರ್ಯದರ್ಶಿ ಪಾಂಡು ನಾಯ್ಕ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ನಾರಾಯಣ ನಾಯ್ಕ ಮತ್ತು ಮಂಜುನಾಥ ನಾಯ್ಕ ಮುಂಡಳ್ಳಿ ಕಾರ್ಯಕ್ರಮ ನಿರೂಪಿಸಿದರು