ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಧಿಕಾರಕ್ಕೆ ಬಂದರೆ ಬಿಜೆಪಿ ಸರಕಾರದ ಅಕ್ರಮಗಳ ತನಿಖೆ: ಸಿದ್ದರಾಮಯ್ಯ

ಅಧಿಕಾರಕ್ಕೆ ಬಂದರೆ ಬಿಜೆಪಿ ಸರಕಾರದ ಅಕ್ರಮಗಳ ತನಿಖೆ: ಸಿದ್ದರಾಮಯ್ಯ

Thu, 16 Feb 2023 19:02:27  Office Staff   Vb

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನೂ ಕೆಲವೇ ದಿನ ಬಾಕಿ ಇರುವ ಸಂದರ್ಭದಲ್ಲಿ ತರಾತುರಿಯಲ್ಲಿ ಟೆಂಡರ್‌ ಮೊತ್ತ ಹೆಚ್ಚಳ ಮಾಡಿ ಲೂಟಿ ಮಾಡಲಾಗುತ್ತಿದೆ. ಮುಂದೆ ನಾವು ಅಧಿಕಾರಕ್ಕೆ ಬಂದರೆ ತನಿಖಾ ಆಯೋಗ ರಚನೆ ಮಾಡಿ ಎಲ್ಲ ತನಿಖೆ ಮಾಡಿಸಿ, ಈ ಸರಕಾರದ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಸದಾಶಿವನಗರದಲ್ಲಿನ ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರಕಾರ ರಾಜ್ಯದ ಬೊಕ್ಕಸವನ್ನು ಮನಸೋ ಇಚ್ಛೆ ಲೂಟಿ ಮಾಡಲು ಆರಂಭ ಮಾಡಿದೆ ಎಂದು ದೂರಿದರು.

ಚುನಾವಣೆಗೆ ದುಡ್ಡು ಮಾಡಿಕೊಳ್ಳುವ ಉದ್ದೇಶದಿಂದ ಅಸಮಾಧಾನಿತ ಶಾಸಕರಿಗೆ ದುಡ್ಡು ಮಾಡಿಕೊಡಲು ತರಾತುರಿನಲ್ಲಿ ಕೆಬಿಜೆಎಲ್‌ನಲ್ಲಿ, ವಿಶ್ವರಯ್ಯ ನೀರಾವರಿ ನಿಗಮ, ನೀರಾವರಿ ನಿಗಮದಲ್ಲಿ ಸಭೆಯನ್ನು ಕರೆದು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ. ಇದರಲ್ಲಿ ಪಾರದರ್ಶಕತೆ ಇಲ್ಲ. ಟೆಂಡರ್ ಹಣವನ್ನು ಎರಡು, ಮೂರು ಪಟ್ಟು ಹೆಚ್ಚಿಗೆ ಮಾಡಿಕೊಂಡಿದ್ದಾರೆ. ಇದು ಶೇ.40ರಷ್ಟು ಕಮಿಷನ್‌ನ ಮುಂದುವರಿದ ಭಾಗ ಎಂದು ದೂರಿದರು.

ಜನರ ತೆರಿಗೆ ಹಣವನ್ನು ರಕ್ಷಣೆ ನಮ್ಮೆಲ್ಲರ ಲೋಕೋಪಯೋಗಿ, ನೀರಾವರಿ, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ 20ಸಾವಿರ ಕೋಟಿ ರೂ.ಬಾಕಿ ಬಿಲ್ ಇದೆ. ಶೇ.10 ಕಮಿಷನ್ ಕೊಟ್ಟವರಿಗೆ ಕಾಮಗಾರಿ ಮಾರಾಟ ನಡೆಯುತ್ತಿದೆ. ಇದು ಸಿಎಂ ಕಚೇರಿಯಿಂದಲೇ ಆರಂಭವಾದುದ್ದು, ಇದನ್ನು ತಡೆಗಟ್ಟಬೇಕಾದುದ್ದು ಅಗತ್ಯ. ಇದನ್ನು ಸದನದಲ್ಲಿಯೂ ಪ್ರಸ್ತಾಪ ಮಾಡುತ್ತೇವೆ ಎಂದು ಅವರು ನುಡಿದರು.

ಸರಕಾರಕ್ಕೆ, ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ. ಮುಂದೆ ಕಾನೂನು ಬಾಹಿರವಾಗಿ ಈ ರೀತಿ ಮಾಡಿದರೆ ನೀವು ಸಿಕ್ಕಿಹಾಕಿಕೊಳ್ಳುತ್ತೀರ, ಈ ವಿಚಾರವನ್ನು ತಾತ್ವಿಕ ಅಂತ್ಯ ಕಾಣಿಸುವವರೆಗೆ ನಾವು ಬಿಡುವುದಿಲ್ಲ. ಕೋರ್ಟ್‌ನಲ್ಲಿಯೂ ಇವರ ವಿರುದ್ಧ ನಾವು ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುತ್ತೇವೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

'ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಹಲವು ನೀರಾವರಿ ನಿಗಮಗಳಲ್ಲಿ ಅಕ್ರಮವಾಗಿ ಒಂದೇ ದಿನ ಸುಮಾರು 18ಸಾವಿರ ಕೋಟಿ ರೂ. ಗೆ ನೀಡಿರುವ ಟೆಂಡರ್, ವರ್ಕ್ ಆರ್ಡರ್ ನೀಡಿರುವ ರದ್ದುಪಡಿಸಿ ಮರು ಟೆಂಡರ್‌ ಗೆ ಆದೇಶ ನೀಡಿರುವುದನ್ನು ರದ್ದು ಮಾಡಬೇಕೆಂದು ಪತ್ರ ಬರೆದಿದ್ದಾರೆ. ಈ ರೀತಿ ಎಲ್ಲ ಶಾಸಕರು ಹೇಳಿದ್ದಾರೆ. ಚುನಾವಣೆ ಕಾಲ ಬಂದಿರುವುದರಿಂದ ಹಣ ಸಂಗ್ರಹ ಮಾಡಿಕೊಳ್ಳಲು ಖಜಾನೆ ಲೂಟಿ ಮಾಡಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.


Share: