ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಇಂದು ರಾಜ್ಯಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೊ ಪಾದಯಾತ್ರೆ

ಇಂದು ರಾಜ್ಯಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೊ ಪಾದಯಾತ್ರೆ

Fri, 30 Sep 2022 15:29:27  Office Staff   Vb

ಬೆಂಗಳೂರು: ಎಐಸಿಸಿ ಮುಖಂಡ ರಾಹುಲ್ ಗಾಂಧಿ ಕೈಗೊಂಡಿರುವ 'ಭಾರತ ಐಕ್ಯತಾ ಪಾದಯಾತ್ರೆ ಸೆ.30ಕ್ಕೆ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಲಿದ್ದು, ಯಾತ್ರೆಯ ಅದ್ದೂರಿ ಸ್ವಾಗತಕ್ಕೆ ಕಾಂಗ್ರೆಸ್ ಪಕ್ಷ ಸಕಲ ಸಿದ್ಧತೆ ಮಾಡಿಕೊಂಡಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಸೆ.7ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ 'ಭಾರತ್ ಜೋಡೊ' ಪಾದಯಾತ್ರೆ ಯಶಸ್ವಿಗೆ ಈಗಾಗಲೇ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.

ಸೆ.30ರಂದು ಕೇರಳದಿಂದ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಆಗಮಿಸಲಿದ್ದು, ಯಾತ್ರೆ ಸ್ವಾಗತಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ಶಾಸಕರು, ಮೇಲ್ಮನೆ ಸದಸ್ಯರು ಸೇರಿದಂತೆ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿನಿತ್ಯ 20ರಿಂದ 25 ಕಿ.ಮೀ ನಷ್ಟು ಪಾದಯಾತ್ರೆ ಸಾಗಲಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಒಟ್ಟು 511 ಕಿ.ಮೀ ಪಾದಯಾತ್ರೆ ಸಂಚರಿಸಲಿದೆ.

ಅ.19ರ ವರೆಗೆ ಒಟ್ಟು 21 ದಿನಗಳ ಕಾಲ 'ಭಾರತ್ ಜೋಡೋ' ಪಾದಯಾತ್ರೆ ರಾಜ್ಯದಲ್ಲಿ ನಡೆಯಲಿದೆ. ಅ.4 ಮತ್ತು 5ರಂದು ದಸರಾ ಉತ್ಸವದ ಹಿನ್ನೆಲೆಯಲ್ಲಿ ಯಾತ್ರೆಗೆ ವಿರಾಮ ನೀಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಬೃಹತ್‌ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿದ್ದು, ಆಡಳಿತಾರೂಢ ಬಿಜೆಪಿ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಶಕ್ತಿಪ್ರದರ್ಶನ ನಡೆಸಲು ಸಿದ್ಧತೆ ಮಾಡಿಕೊಂಡಿದೆ.


Share: