ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಸ. ಪ್ರ.ದ.ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಏಕತೆಗಾಗಿ ಓಟ ಎಂಬ ಘೋಷ ವಾಕ್ಯದಡಿ ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 31 ರಂದು ಬೆಳಗ್ಗೆ 6 ಗಂಟೆಗೆ ಅಜ್ಜರಕಾಡು ಹುತಾತ್ಮರ ಸ್ಮಾರಕ ಸ್ಥಳದಲ್ಲಿ ನಡೆಯಲಿದೆ.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
17 ವರ್ಷದೊಳಗಿನ ಬಾಲಕ, ಬಾಲಕಿಯರು, 20 ವರ್ಷದೊಳಗಿನ ಯುವಕ, ಯುವತಿಯರು ಹಾಗೂ 20 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಓಟವನ್ನು ಆಯೋಜಿಸಲಾಗುತ್ತಿದ್ದು, ಮೊದಲ ಆರು ಸ್ಥಾನ ಪಡೆದ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
ಆಸಕ್ತರು ಓಟದಲ್ಲಿ ಭಾಗವಹಿಸಲು 30 ರ ಒಳಗೆ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.