ಭಟ್ಕಳ: ಜಿಲ್ಲಾಡಳಿತ ಉತ್ತರಕನ್ನಡ, ಜಿಲ್ಲಾ ಪಂಚಾಯತ ಉತ್ತರಕನ್ನಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಹಾಗೂ ಆಡಳಿತ ಮತ್ತು ತಾಲೂಕು ಆಸ್ಪತ್ರೆ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಲಾದ ಆರೋಗ್ಯ ಮೇಳವನ್ನು ಶಾಸಕ ಸುನೀಲ್ ನಾಯ್ಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಆಪತ್ತು ಎದುರಾಗುವ ಸಾಧ್ಯತೆ ಅಧಿಕವಾಗಿದೆ. ಸಮೃದ್ಧ ಜೀವನಕ್ಕೆ ಆರೋಗ್ಯ ಅತಿ ಮುಖ್ಯವಾಗಿದ್ದು, ಜೀವನ ಶೈಲಿಯೂ ಇದರಲ್ಲಿ ಪ್ರಮುಖ ಅಂಶವಾಗಿದೆ. ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲು ನಾವು ಬದ್ಧರಾಗಿದ್ದೇವೆ, ಡಾ.ಸವಿತಾ ಕಾಮತ್ ಅವರ ಪ್ರಯತ್ನದಿಂದ ಸರಕಾರಿ ಆಸ್ಪತ್ರೆ ಸಾಕಷ್ಟು ಸುಧಾರಣೆಯನ್ನು ಕಂಡಿದ್ದು, ಅದರ ಪ್ರಯೋಜನ ಎಲ್ಲರಿಗೂ ಸಿಗುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು. ಭಟ್ಕಳ ಸಹಾಯಕ ಆಯುಕ್ತ ಮಮತಾದೇವಿ ಮಾತನಾಡಿ, ಆರೋಗ್ಯ ಎನ್ನುವುದು ಎಪಿಎಲ್, ಬಿಪಿಎಲ್ ಎಂದು ವರ್ಗೀಕರಣಗೊಳ್ಳುವುದಿಲ್ಲ. ಒಂದು ಸಮೀಕ್ಷೆಯ ಪ್ರಕಾರ ಆರೋಗ್ಯ ರಕ್ಷಣೆಯ ಕಾರಣದಿಂದಲೇ ಶ್ರೀಮಂತಿಕೆಯಿಂದ ಬಡತನಕ್ಕೆ ಜಾರುತ್ತಿರುವವರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಪ್ರಾಥಮಿಕ ಆರೋಗ್ಯವನ್ನು ಖಾತರಿಪಡಿಸುವುದು ಸರಕಾರದ ಉದ್ದೇಶವಾಗಿದೆ. ಭಟ್ಕಳದಂತಹ ಪ್ರದೇಶದಲ್ಲಿ ಖಾಸಗಿ ಸಂಘ ಸಂಸ್ಥೆಯವರು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಇಲ್ಲಿನ ಜನರ ಆರೋಗ್ಯಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ್ ಮಾತನಾಡಿ, ಸಾಂಕ್ರಾಮಿಕ ರೋಗಗಳಂತೆ ಅಸಾಂಕ್ರಾಮಿಕ ರೋಗಗಳ ಬಗ್ಗೆಯೂ ಎಚ್ಚರಿಕೆ ಅಗತ್ಯ ಇದೆ. ಪ್ರಸಕ್ತವಾಗಿ ಜನರು ಒತ್ತಡದಿಂದ ಜೀವನ ಸಾಗಿಸುತ್ತಿದ್ದು, ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕ್ಯಾನ್ಸರ್ನಂತಹ ರೋಗದ ಬಗ್ಗೆ ನಿರ್ಲಕ್ಷ್ಯ ಸಲ್ಲ ಎಂದು ತಿಳಿಸಿದರು. ಭಟ್ಕಳ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಸೀಲ್ದಾರ ಡಾ.ಸುಮಂತ್, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಜಾಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ರಾಮಚಂದ್ರ ವೆರ್ಣೆಕರ್ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಶ್ರೀನಿವಾಸ ಎಲ್ಲರನ್ನೂ ಸ್ವಾಗತಿಸಿದರು. ವ೦ದಿಸಿದರು. ಬಸವರಾಜ ಆಸ್ಪತ್ರೆಯ ಆವರಣದಲ್ಲಿ ನಡೆದ ಆರೋಗ್ಯ ಮೇಳದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಬಂದ ನೂರಾರು ಜನರು ಭಾಗವಹಿಸಿದ್ದರು.