ಮಂಗಳೂರು: ಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರು ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿರುವುದು ವರದಿಯಾಗಿದೆ.
ಪಡುಪಣಂಬೂರು ಬಸದಿ ಬಳಿಯ ನಿವಾಸಿ ತಂಗರಾಜು (49) ಮೃತ ಬೈಕ್ ಸವಾರ.
ತಂಗರಾಜು ಪಡುಪಣಂಬೂರು ಕಡೆಯಿಂದ ಹಳೆಯಂಗಡಿ ಕಡೆಗೆ ತಮ್ಮ ಬೈಕಿನಲ್ಲಿ ಹೊರಟಿದ್ದು, ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ತೆರೆದ ಡಿವೈಡರ್ ರಸ್ತೆಯನ್ನು ದಾಟುತ್ತಿದ್ದ ವೇಳೆ ಹಳೆಯಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಸಂದರ್ಭ ಬೈಕ್ ಸವಾರ ತಂಗರಾಜುಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಕಾರು ಚಾಲಕ ನೆಲ್ಸನ್ ಡಿಸೋಜ ವಿರುದ್ಧ ಮಂಗಳೂರು ಉತ್ತರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.