ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ. ವಿಜಯೇಂದ್ರರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿರುವ ಅವರು, ತಾನು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟು ಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.ನಾನು ಕ್ಷೇತ್ರ ಬಿಟ್ಟು ಕೊಡುತ್ತಿರುವುದರಿಂದ ಶಿಕಾರಿಪುರದಿಂದ ಪತ್ರ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ಕ್ಷೇತ್ರದ ಜನತೆ ನನಗಿಂತ ಹೆಚ್ಚಿನ ಅಂತರದಲ್ಲಿ ವಿಜಯೇಂದ್ರ ಅವರಿಗೆ ಗೆಲುವು ತಂದುಕೊಡಬೇಕು ಎಂದು ಮನವಿ ಮಾಡಿದರು.
ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ ಎಂದರು.
ಈ ಸಂಬಂಧ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ತಮ್ಮ ತಂದೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಯಾವ ರೀತಿ ಮಾರ್ಗದರ್ಶನ ಮಾಡುತ್ತಾರೆ, ಪಕ್ಷನಾಯಕರು ಯಾವ ನಿರ್ಧಾರ
ಕೈಗೊಳ್ಳುತ್ತಾರೆ ಅದರಂತೆ ನಡೆಯುತ್ತೇನೆ ಎಂದು ಹೇಳಿದ್ದಾರೆ. ತಂದೆಯವರ ಮಾರ್ಗದರ್ಶನ ಹಾಗೂ ಪಕ್ಷದ ನಿರ್ಧಾರದಂತೆ
ನಡೆದುಕೊಳ್ಳುತ್ತೇನೆ ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುವುದು ನನ್ನ ಆದ್ಯ ಕರ್ತವ್ಯ. ಹಿಂದಿನಿಂದಲೂ ಅದನ್ನೇ ಮಾಡಿದ್ದೇನೆ, ಮುಂದೆಯೂ ಮಾಡುತ್ತೇನೆ. ಶಿಕಾರಿಪುರದ ಮುಖಂಡರು, ಕಾರ್ಯಕರ್ತರು ತಂದೆಯ ಮೇಲೆ ಒತ್ತಡ ಹೇರಿದ್ದರು. ತಿಂಗಳ ಹಿಂದೆ ಬೆಂಗಳೂರಿಗೂ ಬಂದು ಒತ್ತಡ ಹೇರಿದ್ದರು. ಈ ಹಿನ್ನೆಲೆ ಯಲ್ಲಿ ತಂದೆಯವರು ಇದೀಗ ತೀರ್ಮಾನ ಪ್ರಕಟಿಸಿದ್ದಾರೆ ಎಂದು ವಿಮಸಿದರು.
ನನ್ನತಂದೆಯ ಆಶಯ ಹಾಗೂ ಪಕ್ಷದ ತೀರ್ಮಾನವನ್ನು ಆಧರಿಸಿ ನಾನು ನಿರ್ಧಾರ ಮಾಡುತ್ತೇನೆ. ಈ ವಿಚಾರದಲ್ಲಿ ನಾನು ತಂದೆಯ ಮೇಲೆ ಒತ್ತಡ ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ವಿಜಯೇಂದ್ರ ಅವರು,ಯಡಿಯೂರಪ್ಪ ನಮಗೆ ನಿವೃತ್ತಿ ಅನ್ನೋ ಪದದ ಜೊತೆ ಸಂಬಂಧವೇ ಇಲ್ಲ. ಅವರ ಡಿಕ್ಷನರಿಯಲ್ಲಿ ನಿವೃತ್ತಿ ಎನ್ನುವ ಪದ ಇಲ್ಲ. ಹಿಂದೆ ಕೂಡ ಬಿಜೆಪಿ ಸಂಘಟ ನೆಗೆ ಕೆಲಸ ಮಾಡಿದ್ದರು. ಮುಂದೆಯೂ ಮಾಡುತ್ತಾರೆ ಎಂದು ಹೇಳಿದರು.
ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ವೇಳೆಯಲ್ಲೇ ಯಡಿಯೂರಪ್ಪನವರು ಬಿಜೆಪಿಯನ್ನು ಮುಂದಿನ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ವಿಪಕ್ಷಗಳಿಗೆ ಕೂಡಾ ಯಡಿಯೂರಪ್ಪ ಸವಾಲು ಹಾಕಿದ್ದರು. ಈ ನಿಟ್ಟಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸ ಕೂಡ ಮಾಡುತ್ತಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮಾಜಿ ಸಿಎಂ ಬಿ. ಎಸ್. ಯಡಿ ಯೂರಪ್ಪ ಅವರು ಶ್ರಮ ಹಾಕುತ್ತಾರೆ ಎಂದು ತಿಳಿಸಿದರು.