ಯಲ್ಲಾಪುರ : ಸಹಪಾಠಿಗಳ ಜೊತೆ ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ.
ಅಂಕೋಲಾದ ಗಂಗಾವಳಿ ನದಿಯಲ್ಲಿ ಈ ಘಟನೆ ನಡೆದಿದ್ದು, ಗುಳ್ಳಾಪುರ ಹೈಸ್ಕೂಲ್ ವಿದ್ಯಾರ್ಥಿ ಪ್ರಕಾಶ್ ವಿಟ್ಟು ಪಟ್ಕರೆ (16) ಸಾವನ್ನಪ್ಪಿದ ದುರ್ದೈವಿ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕಾಗಿ ಗಂಗಾವಳಿ ನದಿ ತೀರದ ಬಳಿ ಹೋಗಿದ್ದರು. ಪ್ರಕಾಶ ಗುಂಪಿನಿಂದ ಬೇರ್ಪಟ್ಟು ನದಿಯ ಹತ್ತಿರ ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದ ಎನ್ನಲಾಗಿದೆ.
ವಿಷಯ ತಿಳಿದ ಸ್ಥಳೀಯರು ಹುಡುಕಾಟ ನಡೆಸಿದರು. ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿಗಳು ಶೋಧ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ.
ಪ್ರಕಾಶ ಹಾಸ್ಟೆಲ್ ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ. ವಿದ್ಯಾರ್ಥಿ ಸಾವಿನಿಂದ ಸ್ಥಳದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.