ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / “ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ” ಸೆ.13-22 ರಾಜ್ಯವ್ಯಾಪಿ “ಸೀರತ್’ ಅಭಿಯಾನ

“ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ” ಸೆ.13-22 ರಾಜ್ಯವ್ಯಾಪಿ “ಸೀರತ್’ ಅಭಿಯಾನ

Fri, 13 Sep 2024 00:22:04  Office Staff   SOnews

 

ಬೆಂಗಳೂರು: ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ.13ರಿಂದ 22ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಘಟಕದ ವತಿಯಿಂದ ರಾಜ್ಯವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ದಾರುಸ್ಸಲಾಮ್ ಕಟ್ಟಡದ ಬಿಫ್ಟ್ ಸಭಾಂಗಣದಲ್ಲಿ ಗುರುವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್ (ಸ) ಅವರ ಜೀವನದ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತವೆನಿಸಿದೆ. ಸಮಾಜದಲ್ಲಿಂದು ದ್ವೇಷ, ಅಸೂಯೆ, ಅನೈತಿಕತೆ, ಹಿಂಸೆ, ಸ್ವಾರ್ಥಗಳು ಸಾಮಾನ್ಯ ಎನಿಸಿಬಿಟ್ಟಿದೆ. ಇಂದಿನ ಈ ವಾತಾವರಣವನ್ನು ನೈತಿಕತೆಯ, ಪ್ರೀತಿಯ ಹಾಗೂ ಮಾನವೀಯತೆ ಸಂದೇಶವನ್ನು ಎತ್ತಿ ಹಿಡಿಯಬೇಕಾದ ಅನಿವಾರ್ಯತೆ ಇದೆ” ಎಂದು ತಿಳಿಸಿದರು.

ಸಮಾಜದಲ್ಲಿ ಇಂದು ನೈತಿಕತೆ ಎಷ್ಟು ಅಧಃಪತನಕ್ಕೆ ಈಡಾಗಿದೆ ಎಂಬುದನ್ನು ನಾವು ಗಮನಿಸುತ್ತಲೇ ಇದ್ದೇವೆ. ಮಂಡ್ಯದ ಹೆಣ್ಣು ಭ್ರೂಣ ಹತ್ಯೆ, ತಿಪಟೂರಿನಲ್ಲಿ ಮಗಳ ಮೇಲೆ ತಂದೆಯಿಂದ ಅತ್ಯಾಚಾರ, ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಘಟನೆಗಳು ಸಮಾಜವೇ ತಲೆ ತಗ್ಗಿಸುವಂಥದ್ದು. ಇಂದು ದೇಶದಲ್ಲಿ ನಿಮಿಷಕ್ಕೆ 16 ಅತ್ಯಾಚಾರ ಘಟನೆಗಳು ನಡೆಯುತ್ತಿರುವುದಾಗಿ ಕೆಲವು ವರದಿಗಳು ತಿಳಿಸಿದೆ. ಇಂದು ಗಂಭೀರ ವಿಚಾರ. ಹೀಗಾಗಿ, ನಮ್ಮ ಯುವಕರಿಗೆ ಮೊದಲು ಜಾಗೃತಿ ಮೂಡಿಸಬೇಕಿದೆ. ಹಾಗಾದಲ್ಲಿ ಮಾತ್ರ ಯುವತಿಯರು ಸುರಕ್ಷಿತರಾಗಿ ಇಂದು ಬದುಕಲು ಸಾಧ್ಯ ಎಂದು ತಿಳಿಸಿದರು.


Share: