ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ ಉಚಿತ ಐದು 'ಗ್ಯಾರಂಟಿ' ಯೋಜನೆಗಳಿಗೆ ನೂತನ ಸರಕಾದ ಮೊದಲ ಸಚಿವ ಸಂಪುಟ ಸಭೆ ಶನಿವಾರ ತಾತ್ವಿಕ ಒಪ್ಪಿಗೆ ನೀಡಿದೆ.
ಈ ಕುರಿತ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ' ಸಂಪುಟ ಸಭೆಯಲ್ಲಿ ಐದು ಪ್ರಮುಖ ಯೋಜನೆಗಳಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’, ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಮಾಸಿಕ ಸಹಾಯ ಧನ ನೀಡುವ ‘ಗೃಹ ಲಕ್ಷೀ’, ಪದವೀಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ‘ಯುವ ನಿಧಿ’, ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುವ ‘ಅನ್ನಭಾಗ್ಯ’, ಮಹಿಳೆಯರಿಗೆ ಉಚಿತ ಪ್ರಯಾಣದ 'ಶಕ್ತಿ' ಯೋಜನೆಗಳ ಜಾರಿಗೆ ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ. ಮುಂದಿನ ಕ್ಯಾಬಿನೆಟ್ ಸಭೆ ನಂತರ ಪಂಚ ಯೋಜನೆಗಳ ಜಾರಿಯಾಗಲಿದೆ' ಎಂದು ಮಾಹಿತಿ ನೀಡಿದರು.
'ಎಲ್ಲಾ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುವ ಕರ್ನಾಟಕದ ಮಹಿಳೆಯರಿಗೆ ಫ್ರೀ ಪಾಸ್ ನೀಡಲಾಗುವುದು, ಬೇರೆ ರಾಜ್ಯಗಳ ಮಹಿಳೆಯರಿಗೆ ಈ ಭಾಗ್ಯ ಇರುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
'5 ಗ್ಯಾರಂಟಿ ಈಡೇರಿಸಲು 50 ಸಾವಿರಕ್ಕೂ ಅಧಿಕ ಕೋಟಿ ರೂ. ಅಗತ್ಯ ಇದೆ. ನಮ್ಮ ರಾಜ್ಯದ ಬಜೆಟ್ 3 ಲಕ್ಷದ 10 ಸಾವಿರ ಕೋಟಿ ಆಗಿದೆ. ರಾಜ್ಯಕ್ಕೆ ಕೊಡಬೇಕಿದ್ದ 5, 495 ಕೋಟಿ ರೂಪಾಯಿ ಸಹಾಯ ಧನ ಕೊಟ್ಟಿಲ್ಲ. ಈ ಮೂಲಕ ರಾಜ್ಯಕ್ಕೆ ಕೇಂದ್ರ ಸರಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಝಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.