
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕಿನ್ನಿಗೋಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
ಕಿನ್ನಿಗೋಳಿ ಚರ್ಚ್ ಹಾಲ್ನಲ್ಲಿ ನಡೆದ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿ ಮಾತನಾಡಿ, ರಾಜ್ಯದ ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅದರಂತೆ ವಿವಿಧ ಪೇಟೆ ಪಟ್ಟಣಗಳಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕ ಆಹಾರ ಸ್ವೀಕರಿಸಲಾಗುತ್ತದೆ ಎಂದು ಅವರು ಹೇಳಿದರು.
ಜನತಾದರ್ಶನದಲ್ಲಿ ಸ್ವೀಕರಿಸಿದ ಸಾರ್ವಜನಿಕ ಅಹವಾಲುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಕ್ರಮಗಳನ್ನು ಒದಗಿಸಬೇಕು. ಇದರಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು.
ಅಭಿವೃದ್ಧಿಯಲ್ಲಿ ಎಲ್ಲಾ ಪ್ರದೇಶಗಳನ್ನು ಸಮಾನವಾಗಿ ಕಾಣಲಾಗುವುದು. ಕೊರತೆಗಳಿದ್ದರೆ ಅವುಗಳನ್ನು ಸರಿಪಡಿಸಲಾಗುವುದೆಂದು ಸಚಿವರು ತಿಳಿಸಿದರು.
ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯ ಚಂದ್ರ, ಅಪರ ಜಿಲ್ಲಾಧಿಕಾರಿ ಡಾ. ಸಂತೋμï ಜಿ , ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಮೂಡಬಿದ್ರೆ ಪುರಸಭೆ ಅಧ್ಯಕ್ಷೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.