ಉಡುಪಿ: ಕೋಮು ಸಾಮರಸ್ಯಕ್ಕೆ ಧಕ್ಕೆ ಯಾಗುವ ಯಾವುದೇ ರೀತಿಯ ಚಟುವಟಿಕೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಅನೈತಿಕ ಪೊಲೀಸ್ ಗಿರಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ಆದುದರಿಂದ ಇದರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ನೂತನ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್ ತಿಳಿಸಿದ್ದಾರೆ.
ನಿರ್ಗಮನ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಅವರಿಂದ ಇಂದು ಅಧಿಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು. ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದರು.
ಈ ಹಿಂದಿನ ಎಸ್ಪಿ ನಡೆಸಿದ ಎಲ್ಲ ರೀತಿಯ ಅಕ್ರಮ ಚಟುವಟಿಕೆಗಳ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು. ಮಣಿಪಾಲದಲ್ಲಿ ನಡೆ ಯುತ್ತಿರುವ ಪಬ್, ಡ್ರಗ್ಸ್ ಸೇರಿದಂತೆ ಎಲ್ಲ ರೀತಿಯ ಕಾನೂನು ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವುದು ಕೂಡ ರಾಜ್ಯ ಸರಕಾರದ ಆದ್ಯತೆ ಆಗಿದೆ. ಆ ನಿಟ್ಟಿನಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.
ಎಂಬಿಬಿಎಸ್ ಪದವೀಧರ: ತಮಿಳುನಾಡು ಮೂಲದ ಡಾ.ಕೆ.ಅರುಣ್, 2014ರ ಐಎಪಿಎಲ್ ಬ್ಯಾಚಿನ ಅಧಿಕಾರಿಯಾಗಿದ್ದು, ಪಾಂಡಿಚೇರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪಡೆದಿದ್ದಾರೆ.
ಚಿತ್ರದುರ್ಗ, ದಾವಣಗೆರೆ, ವಿಜಯಪುರ ಜಿಲ್ಲಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಇವರು, ಕಲಬುರಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು.