ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ಮೇ 28 ರಂದು: ಸಚಿವ ಸುನಿಲ್ ಕುಮಾರ್

ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ ಮೇ 28 ರಂದು: ಸಚಿವ ಸುನಿಲ್ ಕುಮಾರ್

Thu, 12 May 2022 15:28:03  Office Staff   SO News

ಉಡುಪಿ : 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮವು ಆಂದೋಲನದ ರೀತಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು.

    ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ 75 ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ನಡೆಯಲಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 

   ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ದೊರಕಿಸಿಕೊಡಲು ಅನೇಕ ಮಹಾನ್ ನಾಯಕರುಗಳು ತಮ್ಮ ಜೀವವನ್ನೇ ತ್ಯಾಗ ಮಾಡಿ, ಹೋರಾಟವನ್ನು ನಡೆಸಿದ್ದಾರೆ. ಇಂತಹ ಹೋರಾಟಗಾರರ ಜೀವನ ಕಥೆ, ಹೋರಾಟದ ವಿವಿಧ ಹಂತಗಳು ಸೇರಿದಂತೆ, ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆಯನ್ನು ಇಂದಿನ ಯುವಜನರಿಗೆ, ಸಾರ್ವಜನಿಕರಿಗೆ ಹಾಗೂ ಹೊರರಾಜ್ಯದವರಿಗೆ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ವಿಭಿನ್ನವಾಗಿ ಹಮ್ಮಿಕೊಳ್ಳಲಾಗಿದೆ ಎಂದರು.
    ಜಿಲ್ಲೆಯಲ್ಲಿ ಮೇ 28 ರಂಧು ಬೆಳಗ್ಗೆ 10.30 ಕ್ಕೆ ಉಡುಪಿಯ ಅಜ್ಜರಕಾಡಿನಲ್ಲಿ ಹಾಗೂ ಕುಂದಾಪುರದ ಬಸ್ರೂರಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದು ಸರಕಾರಿ ಕಾರ್ಯಕ್ರಮವಾಗದೇ ಜನಪರ ಕಾರ್ಯಕ್ರಮವಾಗಬೇಕು, ಯುವಕ ಸಂಘಗಳು, ಸಾಮಾಜಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. 

  ಈ ಕಾರ್ಯಕ್ರಮದ ಯಶಸ್ಸಿಗೆ ತಾಲೂಕು ಮಟ್ಟದಲ್ಲಿ ಸಮಿತಿ ಸಭೆಗಳನ್ನು ವಿವಿಧ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ನಡೆಸಿ, ಕಾರ್ಯಕ್ರಮದ ಯಶಸ್ವಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿ, ಅರ್ಥ ಪೂರ್ಣವಾಗಿ ದೊಡ್ಡ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದರು. 

     ಈಗಾಗಲೇ ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟ ನಡೆದ 75 ಸ್ಥಳಗಳ ಕುರಿತ ಪುಸ್ತಕ ಬಿಡುಗಡೆ ಮಾಡಲಾಗಿದೆ ಎಂದ ಅವರು, ಆಗಸ್ಟ್ 9 ರಿಂದ 15 ರ ವರೆಗೆ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುವುದು ಎಂದರು.

    ಜೂನ್ 15 ರಿಂದ 30 ರ ವರೆಗೆ “ಹೋರಾಟ ನೆಲದಲ್ಲಿ ಒಂದು ದಿನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸ್ವಾತಂತ್ರ್ಯ ಹೋರಾಟ ನಡೆದ ಆಯ್ದ 15 ಸ್ಥಳಗಳಲ್ಲಿ 15 ದಿನ ಕಾರ್ಯಕ್ರಮ ನಡೆಯಲಿದ್ದು, ಆ ಸ್ಥಳದ ಕುರಿತು ಉಪನ್ಯಾಸ ಪ್ರದರ್ಶನ, ಸಾಕ್ಷ್ಯಚಿತ್ರ ಪ್ರದರ್ಶನ ಒಳಗೊಂಡಿರುತ್ತದೆ ಎಂದ ಅವರು, ಈ ಸ್ಥಳಕ್ಕೆ ಸಾರ್ವಜನಿಕರು ಪ್ರೇಕ್ಷಣೀಯ ಸ್ಥಳಕ್ಕೆ ಭೇಟಿ ನೀಡುವ ರೀತಿಯಲ್ಲಿರಬೇಕು. ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಸದಸ್ಯರು ಸ್ಥಳ ಭೇಟಿ ನೀಡುವ ಕುರಿತು ಹೆಚ್ಚಿನ ಪ್ರಚಾರ ನೀಡಬೇಕು ಎಂದರು. 

     ಜಿಲ್ಲೆಗೆ ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿಯ ರಥಯಾತ್ರೆಯು 4 ಕಂದಾಯ ವಿಭಾಗಗಳಿಂದ ಸಂಚರಿಸಲಿದೆ. ಈ ಸಂದರ್ಭದಲ್ಲಿ ಸ್ಥಳೀಯವಾಗಿ ಎಲ್ಲಾ ಗಣ್ಯರು, ಸಚಿವರು, ಜನಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ವಿವಿಧ ಸಂಘಸಂಸ್ಥೆಗಳು ಪಾಲ್ಗೊಳ್ಳಲಿದ್ದಾರೆ ಎಂದರು. 

     ಜಿಲ್ಲೆಯಾದ್ಯಂತ ರಥಯಾತ್ರೆಯ ಪೂರ್ವಭಾವಿಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ದೇಶಭಕ್ತಿ ಸ್ಫರ್ಧೆ, ರಂಗೋಲಿ ಸ್ಪರ್ಧೆ, ಕವನ ರಚನೆ ಸ್ಪರ್ಧೆ ಸೇರಿದಂತೆ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು. 

    ರಥಯಾತ್ರೆ ತಂಗುವ ಸ್ಥಳಗಳಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಉಪನ್ಯಾಸ, ಸ್ವಾತಂತ್ರ್ಯ ಹೋರಾಟವನ್ನು ನೆನಪಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿವೆ ಎಂದರು.

    ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು, ವಿವಿಧ ತಾಲೂಕುಗಳ ತಹಶೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share: