ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಆನಂದ್ ತೇಲ್ತುಂಬ್ಡೆ ಕಾರಾಗೃಹದಿಂದ ಬಿಡುಗಡೆ

ಆನಂದ್ ತೇಲ್ತುಂಬ್ಡೆ ಕಾರಾಗೃಹದಿಂದ ಬಿಡುಗಡೆ

Sun, 27 Nov 2022 18:15:08  Office Staff   Vb

ಮುಂಬೈ: ಸಾಮಾಜಿಕ ಹೋರಾಟಗಾರ ಆನಂದ್ ತೇಲ್ತುಂಬ್ಡೆ ಅವರು ನವಿ ಮುಂಬೈಯ ತಲೋಜಾ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾಗಿದ್ದಾರೆ.

ಎಲ್ದಾರ್ ಪರಿಷದ್-ಮಾವೋವಾದಿ ನಂಟು ಪ್ರಕರಣದಲ್ಲಿ ತೇಲ್ತುಂಬ್ಡೆ ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ನವೆಂಬರ್ 18ರಂದು ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಆದರೆ, ಸುಪ್ರೀಂ ಕೋರ್ಟ್ ಎನ್‌ ಐಎಯ ಅರ್ಜಿಯನ್ನು ಶುಕ್ರವಾರ ತಿರಸ್ಕರಿಸಿತು. ಇದಾದ ಒಂದು ದಿನದ ಬಳಿಕ ತೇಲ್ತುಂಬ್ಡೆ ಅವರು ತಲೋಜಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ 73 ವರ್ಷದ ತೇಲ್ತುಂಬ್ಡೆ ಅವರು ಕಳೆದ ಎರಡೂವರೆ ವರ್ಷಗಳಿಂದ ಕಾರಾಗೃಹದಲ್ಲಿದ್ದರು. ಇಂದು ಅಪರಾಹ್ನ 1:15ಕ್ಕೆ ತೆರಳಿದ್ದಾರೆ ಎಂದು ತಲೋಜಾ ಕೇಂದ್ರ ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.

ಬಿಡುಗಡೆ ಬಗ್ಗೆ ಪ್ರತಿಕ್ರಿಯಿಸಿರುವ ತೇಲ್ತುಂಬ್ಡೆ ಅವರು, “31 ತಿಂಗಳುಗಳ ಬಳಿಕ ಕಾರಾಗೃಹದಿಂದ ಬಿಡುಗಡೆಯಾಗುತ್ತಿರುವುದು ಸಂತಸ ತಂದಿದೆ” ಎಂದಿದ್ದಾರೆ.

2017 ಡಿಸೆಂಬರ್ 31ರಂದು ಪುಣೆಯಲ್ಲಿ ಆಯೋಜಿಸಲಾಗಿದ್ದ ಎಲ್ಲಾರ್ ಪರಿಷದ್ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತೇಲ್ತುಂಬ್ಡೆ ಅವರು ಮಾಡಿದ ಪ್ರಚೋದನಾಕಾರಿ ಭಾಷಣದಿಂದ ಪಶ್ಚಿಮ ಮಹಾರಾಷ್ಟ್ರದ ಹೊರವಲಯದಲ್ಲಿರುವ ಭೀಮಾ-ಕೋರೆಗಾಂವ್ ಸ್ಮಾರಕದ ಸಮೀಪ ಮರುದಿನ ಹಿಂಸಾಚಾರ ನಡೆದಿತ್ತು. ಈ ಹಿಂಸಾಚಾರದಲ್ಲಿ ಓರ್ವ ಮೃತಪಟ್ಟಿದ್ದ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ.


Share: