ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಹಾಸನ: ಅಕ್ರಮ ಗಣಿಗಾರಿಕೆ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಚಂದ್ರಬಾಬು ನಾಯ್ಡು ಆಗ್ರಹ

ಹಾಸನ: ಅಕ್ರಮ ಗಣಿಗಾರಿಕೆ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಚಂದ್ರಬಾಬು ನಾಯ್ಡು ಆಗ್ರಹ

Mon, 30 Nov 2009 02:30:00  Office Staff   S.O. News Service
ಹಾಸನ, ನ.೨೯- ಅಕ್ರಮ ಗಣಿಗಾರಿಕೆ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿರುವ ಟಿಡಿಪಿ ನಾಯಕ ಚಂದ್ರಬಾಬು ನಾಯ್ದು ನಿಲುವಿಗೆ ಅಗತ್ಯಬಿದ್ದರೆ ಬೆಂಬಲ ವ್ಯಕ್ತಪಡಿಸುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿ‌ಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಇದೇ ವೇಳೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮತ್ತು ಸ್ಥಾನ ಹೊಂದಾಣಿಕೆ ಕುರಿತು ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಗೌಡರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟದ ಕಹಳೆ ಮೊಳಗಿಸಿರುವ ಟಿಡಿಪಿ ಮತ್ತು  ಎಡಪಕ್ಷಗಳ ನಿಲುವಿಗೆ ಜೆಡಿ‌ಎಸ್ ಬೆಂಬಲ ವ್ಯಕ್ತಪಡಿಸಿದೆ.

ಹಾಸನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು, ಕೇಂದ್ರ ಮತ್ತು ಆಂಧ್ರದಲ್ಲಿ ಒಂದೇ ಪಕ್ಷ ಆಡಳಿತ ನಡೆಸುತ್ತಿದೆ. ಹಗರಣದ ಬಗ್ಗೆ ಸಿಬಿ‌ಐ ತನಿಖೆ ನಡೆಸುವಂತೆ ಈಗಾಗಲೇ ಆಂಧ್ರ ಸರಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ.

ಇದೆಲ್ಲಾ ಪಕ್ಷದ ಹೈಕಮಾಂಡ್ ಆದೇಶಾನುಸಾರವೇ ನಡೆಯುತ್ತಿರಬಹುದು ಎಂದು ಅನಿಸಿಕೆ ವ್ಯಕ್ತಪಡಿಸಿದ ಗೌಡರು, ರಾಷ್ಟ್ರೀಯ ಪಕ್ಷ ಮುಂದೆ ಏನು ಮಾಡಲಿದೆ ಎಂಬುದನ್ನು ಕಾದು ನೋಡೋಣ ಎಂದರು.

 ಅಭಿವೃದ್ಧಿಗೆಂದು ಆಗ್ಗಿಂದ್ದಾಗ್ಗೆ ಬಹುತೇಕ ರೈತರ ಕೃಷಿಭೂಮಿ ಸ್ವಾಧೀನ ಮಾಡಲಾಗುತ್ತಿದೆ.ಇದರ ಸಾಧಕ-ಬಾಧಕಗಳ ಬಗ್ಗೆ ತಿದ್ದುಪಡಿ ಮಸೂದೆಯೊಂದನ್ನು ಸಂಸತ್‌ನಲ್ಲಿ ಮಂಡಿಸುವುದಾಗಿ ಕೇಂದ್ರ ಸರಕಾರ ಹೇಳಿದೆ. ಮಸೂದೆ ಮಂಡನೆಯಾದ ನಂತರ ಈ ಕುರಿತು ಪ್ರತಿಕ್ರಿಯಿಸುವುದಾಗಿ ಗೌಡರು ಹೇಳಿದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮತ್ತು ಸ್ಥಾನ ಹಂಚಿಕೆ ಕುರಿತು ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಸಿ‌ಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಕೈಗೊಳ್ಳುವ ತೀರ್ಮಾನಕ್ಕೆ ತಾವು ಬದ್ಧ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
 
ನೈಸ್ ಕಂಪನಿಗೆ ಹೆಚ್ಚುವರಿ ಭೂಮಿ ನೀಡಲು ಮುಂದಾಗಿರುವ ರಾಜ್ಯ ಸರಕಾರದ ಕ್ರಮದ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅವರು, ನೈಸ್ ವಿವಾದ ಸುಪ್ರೀಂಕೋರ್ಟ್‌ನಲ್ಲಿದ್ದು, ಏನಾಗುವುದೋ ಕಾದು ನೋಡೋಣ ಎಂದರು.



Share: