ಭಟ್ಕಳ: ಮುರ್ಡೇಶ್ವರದ ಆರ್.ಎನ್.ಎಸ್. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ತೆರೆಯಲಾಗಿದ್ದು ದಿನಾಂಕ ನ.೧೯ರಂದು ಉದ್ಘಾಟನೆಗೊಳ್ಳಲಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಚೇತನ್ ಕಲ್ಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಯಾಲಿಸಿಸ್ ಕೇಂದ್ರದಲ್ಲಿ ಈಗಾಗಲೇ ಎರಡು ಯಂತ್ರಗಳನ್ನು ಅಳವಡಿಸಲಾಗಿದ್ದು ಒಂದು ದಿನದಲ್ಲಿ ೬ ಜನರಿಗೆ ಡಯಾಲಿಸಿಸ್ ಮಾಡಬಹುದಾಗಿದೆ. ಹೆಚ್ಚಿನ ಬೇಡಿಕೆ ಇದ್ದಲ್ಲಿ ಯಂತ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಅವಕಾಶವಿದೆ ಎಂದ ಅವರು ತಮ್ಮ ಆಸ್ಪತ್ರೆಯಲ್ಲಿ ಆರ್.ಓ. ಸಿಸ್ಟಮ್ ಕೂಡಾ ಅಳವಡಿಸಲಾಗಿದ್ದು ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇನ್ನೂ ಹೆಚ್ಚುವರಿ ಸೇವೆ ನೀಡಲು ಸಿದ್ಧರಿದ್ದೇವೆ ಎಂದೂ ಅವರು ತಿಳಿಸಿದ್ದಾರೆ.
ಡಯಾಲಿಸಿಸ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನ.೧೯ರಂದು ಶನಿವಾರ ಮಧ್ಯಾಹ್ನ ೧೨ ಗಂಟೆಗೆ ನಡೆಯಲಿದ್ದು ಕಾರ್ಯಕ್ರಮದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ. ಸವಿತಾ ಕಾಮತ್, ನೆಪ್ರೋಲಜಿಸ್ಟ್ ಡಾ. ರಾಘವೇಂದ್ರ ನಾಯಕ, ಆರ್.ಎನ್.ಎಸ್. ಟ್ರಸ್ಟಿನ ನಾಗರಾಜ ಶೆಟ್ಟಿ ಅವರು ಉಪಸ್ಥಿತರಿರಲಿದ್ದಾರೆ ಎಂದೂ ತಿಳಿಸಿದ್ದಾರೆ.