ಭಟ್ಕಳ: ಮೀನು ಮಾರುಕಟ್ಟೆ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಪುರಸಭೆಯ ನಿರ್ಣಯಕ್ಕೆ ವಿರುದ್ಧವಾಗಿ ಅಧಿಕಾರಿಗಳಿಗೆ ಆದೇಶ ನೀಡಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಹಳೆಯ ಮೀನು ಮಾರುಕಟ್ಟೆಯನ್ನೇ ಪುರಸಭೆಯ ವತಿಯಿಂದ ನಿರ್ವಹಣೆ ಮಾಡಿಕೊಂಡು ಮೀನು ಮಾರಾಟಕ್ಕೆ ಅವಕಾಶ ಕಲ್ಪಿಸುವಂತೆ ಪುರಸಭಾ ಮುಖ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೀನುಮಾರಾಟಗಾರರು, ಅಂಗಡಿಕಾರರ ಪರ ಸಚಿವರ ಮುಂದೆ ಅಹವಾಲು ಮಂಡಿಸಿದ ಪುರಸಭಾ ನಾಮ ನಿರ್ದೇಶಿತ ಸದಸ್ಯ ಶ್ರೀಕಾಂತ, ಹಳೆ ಬಸ್ ನಿಲ್ದಾಣದಲ್ಲಿ ಆಟೋ ನಿಲ್ದಾಣ, ಮೀನು ಮಾರುಕಟ್ಟೆ, ಅಂಗಡಿಗಳು ಒಂದಕ್ಕೊಂದು ಪೂರಕವಾಗಿ ವ್ಯಾಪಾರ ವಹಿವಾಟು ನಡೆಸಿಕೊಂಡು ಬಂದಿವೆ. ಈಗ ಮೀನು ಮಾರುಕಟ್ಟೆಯನ್ನು ಸ್ಥಳಾಂತರಿಸುವುದರಿಂದ ಉಳಿದ ವ್ಯಾಪಾರ, ವಹಿವಾಟಿನ ಮೇಲೆ ಪರಿಣಾಮ ಬೀರುತ್ತವೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶ್ರೀನಿವಾಸ ಪೂಜಾರಿ, ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೂ ಮಾತನಾಡುತ್ತೇನೆ ಎಂದರು. ಪುರಸಭಾ ಪ್ರಭಾರ ಮುಖ್ಯಾಧಿಕಾರಿ ದಯಾನಂದ ದೇಸಾಯಿ ಉಪಸ್ಥಿತರಿದ್ದರು.