ಧಾರವಾಡ : ಮನೆಯಲ್ಲಿ ಮಕ್ಕಳಿಗೆ ಲಾಲನೆ ಪಾಲನೆ ಪೋಷಣೆಯಲ್ಲಿ ತಾಯಂದಿರ ಪಾತ್ರ ಬಹುದೊಡ್ಡದು. ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗಸ್ಥರಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿಂದ ಸರಿಯಾದ ರೀತಿಯಲ್ಲಿ ಮಕ್ಕಳನ್ನು ಪಾಲನೆ ಪೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಕೆಲಸದ ವೇಳೆಯಲ್ಲಿ ಮಕ್ಕಳನ್ನು ನೋಡಿಕೊಳ್ಳುವುದು ಕಷ್ಟಸಾಧ್ಯವಾಗುತ್ತಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಎರಡು ಶಿಶು ಪಾಲನಾ ಕೇಂದ್ರಗಳ ಶಿಕ್ಷಕಿಯರು, ಸಹಾಯಕಿಯರು ಹಾಗೂ ನರೇಗಾ ಯೋಜನೆಯಡಿ ಆಯ್ಕೆ ಆದ ಕೇರ್ ಟೇಕರ್ಸ್ಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಶು ಪಾಲನಾ ಕೇಂದ್ರಕ್ಕೆ ದಾಖಲಾಗುವ ಮಕ್ಕಳ ಆರೈಕೆ ಪಾಲನೆ ಪೋಷಣೆಯನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಇಲಾಖೆ ತಮಗೆ ತರಬೇತಿಯನ್ನು ನೀಡುತ್ತಿದೆ. ತರಬೇತಿಯಲ್ಲಿ ತಿಳಿಸಿಕೊಡುವ ವಿಧಾನ, ಪದ್ಧತಿಗಳನ್ನು ಅಳವಡಿಸಿಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಆಯ್ಕೆ ಆದ ಅಭ್ಯರ್ಥಿಗಳಿಗೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಡಾ.ಹೆಚ್.ಹೆಚ್ ಕುಕನೂರ ಮಾತನಾಡಿ, ಮಕ್ಕಳು ದೇವರ ಸಮಾನ ಅವರನ್ನು ಅತ್ಯಂತ ಕಾಳಜಿಪೂರ್ವಕವಾಗಿ ಜೋಪಾನ ಮಾಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಉದ್ಯೋಗಸ್ಥ ಮಹಿಳೆಯರು ಯೋಜನೆಯ ಸದುಪಯೋಗಪಡೆದುಕೊಳ್ಳಲು ಹೆಚ್ಚಿನ ಪ್ರಚಾರವನ್ನು ಕೈಗೊಳ್ಳಲಾಗಿದೆ. ಕೇಂದ್ರವನ್ನು ನಡೆಸಲು ಅಗತ್ಯವಿರುವ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡಲು ಆಗಮಿಸಿರುವ ಮೊಬೈಲ್ ಸಂಸ್ಥೆಯ ಸಿಬ್ಬಂದಿಯವರು ನಿಗದಿತ ತರಬೇತಿಯನ್ನು ನೀಡುವರು. ಜಿಲ್ಲೆಗೆ ಮಂಜೂರಾಗಿರುವ ಒಟ್ಟು 06 ಶಿಶುಪಾಲನಾ ಕೇಂದ್ರಗಳ ಕುರಿತಂತೆ, ಸಂಕ್ಷಿಪ್ತವಾಗಿ ವಿವರಿಸಿದರು. ಅದರಂತೆ ಅಭ್ಯರ್ಥಿಗಳು ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮೊಬೈಲ್ ಕ್ರಶ್ ಸಂಸ್ಥೆಯ 03 ಜನ ತರಬೇತುದಾರರು, 32 ಜನ ಶಿಬಿರಾರ್ಥಿಗಳು, 05 ಜನ ಮಹಿಳಾ ಮೇಲ್ವಿಚಾರಕಿಯರು ಭಾಗವಹಿಸಿದ್ದರು.