ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಮಕ್ಕಳಿಗೆ ಸಕಾಲದಲ್ಲಿ ಲಸಿಕೆ ಕೊಡಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಮಕ್ಕಳಿಗೆ ಸಕಾಲದಲ್ಲಿ ಲಸಿಕೆ ಕೊಡಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Sun, 06 Aug 2023 22:44:26  Office Staff   SO News

ಉಡುಪಿ : ಪೋಷಕರು ತಮ್ಮ ಮಕ್ಕಳನ್ನು ಹಲವು ವಿಧದ ರೋಗಗಳಿಂದ ರಕ್ಷಿಸಲು ನಿಗಧಿತ ಅವಧಿಯೊಳಗೆ ಅಗತ್ಯ ಲಸಿಕೆಗಳನ್ನು ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

  ಅವರು  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಕಾರ್ಯಕ್ರಮ ಕುರಿತ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಗರ್ಭಿಣಿಯರು ಮತ್ತು ಮಕ್ಕಳಿಗೆ ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯ ನಿಯಮಿತವಾಗಿ ಅಗತ್ಯ ಲಸಿಕೆಗಳನ್ನು ನೀಡುವುದರಿಂದ ತಾಯಿ ಮತ್ತು ಶಿಶು ಮರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯವಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಗಳ ಬಗ್ಗೆ ಸಮೀಪದ ಆರೋಗ್ಯ ಕೇಂದ್ರ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮಾಹಿತಿ ಪಡೆದು ಲಸಿಕೆ ಪಡೆಯುವಂತೆ ತಿಳಿಸಿದರು.

  ಜಿಲ್ಲೆಯಲ್ಲಿ ಲಸಿಕೆ ವಂಚಿತ ಗರ್ಭಿಣಿಯರು ಮತ್ತು 0-5 ವರ್ಷದೊಳಗಿನ ಮಕ್ಕಳಿಗೆ ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಕಾರ್ಯಕ್ರಮವನ್ನು, ಆಗಸ್ಟ್ 7 ರಿಂದ 12 ಮೊದಲನೇ ಸುತ್ತು, ಸೆಪ್ಟಂಬರ್ 11 ರಿಂದ 16 ರ ವರೆಗೆ 2 ನೇ ಸುತ್ತು ಹಾಗೂ ಅಕ್ಟೋಬರ್ 9 ರಿಂದ 14 ರ ವರೆಗೆ ಒಟ್ಟು 3 ಸುತ್ತುಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ವೇಳಾಪಟ್ಟಿಯಂತೆ ವಯಸ್ಸಿಗನುಗುಣವಾಗಿ ಲಸಿಕೆ ಪಡೆಯಲು ಅರ್ಹರಾದ ಮತ್ತು ಲಸಿಕೆ ವಂಚಿತರಾದ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕಾ ಶಿಬಿರ ಆಯೋಜಿಸಿ ಲಸಿಕೆ ನೀಡಲಾಗುವುದು ಎಂದರು.

  ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 708 ಗರ್ಭಿಣಿಯರು ಮತ್ತು 0-2 ವರ್ಷದೊಳಗಿನ ಲಸಿಕೆಗೆ ಅರ್ಹರಾದ 3188 ಮಕ್ಕಳಿಗೆ ಹಾಗೂ 2-5 ವರ್ಷದೊಳಗಿನ ಲಸಿಕೆ ವಂಚಿತ 16 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಇದಕ್ಕಾಗಿ 294 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದರು.

  ಈ ಲಸಿಕಾ ಶಿಬಿರದ ಮೂಲಕ ಜಿಲ್ಲೆಯಲ್ಲಿ ಗರ್ಭಿಣಿ ಮತ್ತು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹಾಗೂ ದಡಾರ ರೂಬೆಲ್ಲಾ ರೋಗ ನಿರೋಧಕತೆಯ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದ್ದು, ಶಿಬಿರ ನಡೆಯುವ ದಿನಾಂಕ ಮತ್ತು ಸ್ಥಳಗಳ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪೋಷಕರಿಗೆ ಮಾಹಿತಿ ನೀಡಲಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು ಎಂದರು.

   ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಕಾರ್ಯಕ್ರಮದ ಉದ್ಘಾಟನೆಯು ಆಗಸ್ಟ್ 7 ರಂದು ಬೆಳಗ್ಗೆ 9 ಗಂಟೆಗೆ ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದರು.

  ಇದೇ ಸಂದರ್ಭದಲ್ಲಿ ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಲಸಿಕಾ ಕಾರ್ಯಕ್ರಮದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಬಿಡುಗಡೆಗೊಳಿಸಿದರು.

 ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಎಂ.ಜಿ.ರಾಮ ಮತ್ತಿತರರು ಉಪಸ್ಥಿತರಿದ್ದರು.


Share: