ಕಾರವಾರ: ಪರಿಶಿಷ್ಟ ಜಾತಿ ಸೌಲಭ್ಯ ಮುಂದುವರಿಸುವಂತೆ ಆಗ್ರಹಿಸಿ ಮೊಗೇರ ಸಮಾಜದ ಧರಣಿ ನಿರತ ಸ್ಥಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಮೊಗೇರ ಸಮಾಜದ ಪ್ರಮುಖರು ತಮ್ಮ ಸಮಸ್ಯೆಗಳ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ಮಾಡಲಾಗಿತ್ತು. ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಲಾಯಿತು. ಈ ಬಗ್ಗೆ ಅಧಿಕಾರಿಗಳಿಂದ ಲಿಖಿತ ರೂಪದಲ್ಲಿ ಮಾಹಿತಿಯನ್ನು ಕೇಳಲಾಗಿದೆ. ಆ ಮಾಹಿತಿಗಳು ಬಂದ ನಂತರ ಅದನ್ನು ಬೆಂಗಳೂರಿಗೆ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇದೇ ವಿಷಯಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರೊಂದಿಗೂ ದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಆಯೋಜಿಸುವ ಬಗ್ಗೆ ಮಾತನಾಡಿದ್ದಾರೆ. ಸಮಯ ನಿಗದಿ ಆದ ನಂತರ ನಿಮಗೆ ಮಾಹಿತಿ ನೀಡಲಾಗುವುದು. ಅಲ್ಲಿಯವರೆಗೆ ಪ್ರಜಾಪ್ರಭುತ್ವದ ಆಶಯಕ್ಕೆ ಧಕ್ಕೆ ಬರದ ರೀತಿಯಲ್ಲಿ ಪ್ರತಿಭಟನೆ ನಡೆಸಿದರೆ ಅದಕ್ಕೆ ತಮ್ಮ ಬೆಂಬಲ ಇದೆ ಎಂದರು.