ಭಟ್ಕಳ: ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಭಟ್ಕಳ, ಅಭಿಯೋಜನಾ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜನತಾ ವಿದ್ಯಾಲಯ ಶಿರಾಲಿ ಇವುಗಳ ಸಹಯೋಗದಲ್ಲಿ ಶಿರಾಲಿಯ ಜನತಾ ವಿದ್ಯಾಲಯ ಸಭಾ ಭವನದಲ್ಲಿ ಏರ್ಪಡಿಸಲಾಗಿದ್ದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ. ಅವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧ ಎನ್ನುವುದು ಎಲ್ಲರೂ ತಿಳಿದಿರಬೇಕು. ಬಾಲ ಕಾರ್ಮಿಕರನ್ನು ಯಾವುದೇ ಕೆಲಸಕ್ಕೆ ಬಳಸಿದಲ್ಲಿ ಕಾರ್ಮಿಕ ಅಧಿಕಾಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳುತ್ತಾರೆ. ಅದರಲ್ಲಿಯೂ ಕೂಡಾ ಅಪಾಯಕಾರಿ ಕೆಲಸಕ್ಕೆ ಬಾಲ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವುದು ನಿಷಿದ್ಧವಾಗಿದ್ದು ಯರೂ ಕೂಡಾ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಬಾರದು ಎಂದರು.
ಇದಕ್ಕೂ ಪೂರ್ವ ನೆರೆದಿದ್ದ ಸಭಿಕರು ಹಾಗೂ ವಿದ್ಯಾರ್ಥಿಗಳಿಗೆ ಬಾಲ ಕಾರ್ಮಿಕ ವಿರೋಧಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ಎಲ್. ನಾಯ್ಕ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದ ಪ್ರಭಾರ ಕಾರ್ಮಿಕ ನಿರೀಕ್ಷಕ ಆರ್.ಟಿ. ಬಾಬು, ಗ್ರಾಮೀಣ ಠಾಣೆಯ ಸಬ್ ಇನ್ಸಪೆಕ್ಟರ್ ರತ್ನಾ ಎಸ್. ಕೆ., ಬಾಲ ಕಾರ್ಮಿಕರ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಅತಿಥಿಗಳಾಗಿ ಪ್ರಾಂಶುಪಾಲ ಎ.ಬಿ.ರಾಮರಥ, ನ್ಯಾಯವಾದಿ ಶಂಕರ ಕೆ. ನಾಯ್ಕ ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕ ಎಚ್.ಎಸ್.ಗುನಗ ಸ್ವಾಗತಿಸಿದರು, ಜನತಾ ವಿದ್ಯಾಲಯದ ಪ್ರಾಂಶುಪಾಲ ಎ.ಬಿ. ರಾಮರಥ ಪ್ರಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಟಿ.ಬಿ. ಮಡಿವಾಳ ನಿರೂಪಿಸಿದರು.