ಕಾರವಾರ: ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದೆ ಜಿಲ್ಲಾ ಪಂಚಾಯತಿಯಿಂದ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಉತ್ತರಕನ್ನಡ ಜಿಲ್ಲಾ ಪಂಚಾಯತಿ ಕಚೇರಿ ಎದುರು ಧರಣಿ ನಡೆಸಲಾಗುತ್ತಿದೆ.
ಭಟ್ಕಳ ತಾಲ್ಲೂಕಿನಲ್ಲಿ ನಡೆದಿರುವ ಭ್ರಷ್ಟಾಚಾರದ ಕುರಿತು ತನಿಖೆಗೆ ಒತ್ತಡ ಹೇರಿದ ಮೇಲೆ ಎರಡು ಬಾರಿ ಪ್ರಕರಣದ ತನಿಖೆ ನಡೆಸಲಾಗಿದೆ. ತನಿಖಾ ವರದಿಯಲ್ಲಿ ಪಂಚಾಯತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ. ಆದರೆ ಭ್ರಷ್ಟಾಚಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾ ಪಂಚಾಯತಿ ವಿಫಲವಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ. ಹಣಕಾಸು ಆಯೋಗದ ನಿಧಿಯನ್ನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಕ್ರಿಯಾ ಯೋಜನೆಗಳಿಗೆ ಮಂಜೂರಾತಿ ಪಡೆಯದೆ ಸಂಬಂಧಿಗಳ ಹೆಸರಿನಲ್ಲಿ ಬಿಲ್ ಪಾವತಿಸಿಕೊಳ್ಳಲಾಗಿದೆ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಉಪಾಧ್ಯಕ್ಷ ಶಂಕರ್ ನಾಯ್ಕ,ಎಂದು ಕಾರ್ಯಕರ್ತ ಆರೋಪಿಸಿದ್ದಾರೆ
ಇನ್ನು ಅಧಿಕಾರಿಗಳು ಸರ್ಕಾರಿ ಆದೇಶಗಳನ್ನ ಸರಿಯಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸುವ ಕಾರ್ಯಕರ್ತರು, ಹೆಬಳೆ ಗ್ರಾಮ ಪಂಚಾಯತಿಯಲ್ಲಿ ಅಕ್ರಮಗಳು ನಡೆದು ಎರಡು ವರ್ಷ ಕಳೆದರೂ, ಆರೋಪ ಸಾಬೀತಾಗಿದ್ದರೂ ತಪ್ಪಿತಸ್ಥರ ಮೇಲೆ ಯಾವುದೇ ಕ್ರಮವಾಗಿಲ್ಲ. 14, 15ನೇ ಹಣಕಾಸು ಯೋಜನೆ, ನರೇಗಾ ಸೇರಿದಂತೆ ಅನೇಕ ಯೋಜನೆಗಳಲ್ಲಿ ಅವ್ಯವಹಾರವಾಗಿದೆ. ಆದರೆ ಅವ್ಯವಹಾರ ನಡೆಸಿದವರ ವಿರುದ್ಧ ಕ್ರಮಕ್ಕೆ ನಾವು ಪ್ರತಿಭಟನೆ ನಡೆಸಿ ಒತ್ತಾಯಿಸಬೇಕಾಗಿರುವುದು ದುರ್ದೈವ ಎನ್ನುತ್ತಾರೆ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಕುಣಿಗಲ್.